ಮಂಕುತಿಮ್ಮನ ಕಗ್ಗ – ದಿನಕ್ಕೊಂದು ಕಗ್ಗ ೫

ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? ।
ನಾವರಿಯಲಾರದೆಲ್ಲದರೊಟ್ಟು ಹೆಸರೆ? ॥
ಕಾವನೊರ್ವನಿರಲ್ಕೆ ಜಗದ ಕಥೆಯೇಕಿಂತು? ।
ಸಾವು ಹುಟ್ಟುಗಳೆನು? – ಮಂಕುತಿಮ್ಮ ॥ ೫ ॥

ದೇವರೆಂಬುದು ಅದೇನು ಕಗ್ಗತ್ತಲ ಗವಿಯೆ?. ನಾವರಿಯಲಾರದ ಎಲ್ಲದರ ಒಟ್ಟು ಹೆಸರೇ? ಕಾವನು(=ಕಾಯುವವನು) ಓರ್ವನು(=ಒಬ್ಬನು) ಇರಲ್ಕೆ( =ಇರಲು) ಜಗದ ಕಥೆಯು ಏಕಿಂತು? ಸಾವು ಹುಟ್ಟುಗಳೇನು? – ಮಂಕುತಿಮ್ಮ. 

 ಮಾನವನಿಗೆ ಯೋಚಿಸುವ ಶಕ್ತಿ ಬಂದಾಗಿನಿಂದ ಇದೊಂದು ಕಾಡುವ ಪ್ರಶ್ನೆ. ಅಂದು ಮನುಷ್ಯ ಕಾಡಿನಲ್ಲಿ ಅಲೆಮಾರಿಯಾಗಿದ್ದ. ಕೈಗೆ ಸಿಕ್ಕದ್ದನ್ನು ತಿಂದು, ತನ್ನನ್ನು ತಾನು ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದ. ಆಗ ಅವಿನಿಗೆ ಬಂದ ಯೋಚನೆ ಹೀಗಿದ್ದಿರಬಹುದು. ದಿನದ ಯಾವುದೋ ಸಮಯದಲ್ಲಿ ಒಂದು ವಸ್ತು  ಗಗನದಲ್ಲಿ ಬರುತ್ತದೆ. ಆಗ ಎಲ್ಲವೂ ನಿಚ್ಚಳವಾಗಿ ಕಾಣುತ್ತದೆ. ಕಾಡು ಪ್ರಾಣಿಗಳಿಂದ  ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಾಯವಾಗುತ್ತದೆ. ಆಹಾರವನ್ನು ಹುಡುಕಲು ಆಡುವ ಬೇಟೆಯೂ ಯಶಸ್ವೀ. ಆದರೆ ದಿನದ ಯಾವುದೋ ಸಮಯದಲ್ಲಿ ಗಗನದಲ್ಲಿ ಆ ವಸ್ತು ಕಾಣೆಯಾಗುತ್ತದೆ. ಆಗ ಎಲ್ಲವೂ ಕತ್ತಲೆ.  ಕಾಡು  ಪ್ರಾಣಿಗಳಿಂದ ತನ್ನ ರಕ್ಷಣೆ ಕಷ್ಟ ಅಥವಾ ಅಸಾಧ್ಯ. ಹಾಗಾಗಿ ಗಗನದಲ್ಲಿ ಬರುವ ವಸ್ತು ತನಗೆ ಸಹಾಯ ಮಾಡುತ್ತದೆ. ಆಕಾಶದಿಂದ ನೀರು ಬೀಳುತ್ತದೆ. ಗಿಡಮರಗಳು ಚಿಗುರಿ ಗೆಡ್ಡೆ ಗೆಣಸುಗಳು, ಹಣ್ಣು ಹಂಪಲುಗಳು ಯತೇಚ್ಚವಾಗಿ  ಸಿಗುತ್ತದೆ. ಹಾಗೇ  ಗಗನದಿಂದ ಬಂದ ಮಳೆ ತನಗೆ ಸಹಾಯಮಾಡುತ್ತದೆ. ಎಲ್ಲವೂ ಮೇಲಿಂದ ಬರುವುದರಿಂದ, ಇದನ್ನೆಲ್ಲಾ ಕೊಡುವ ಅಥವಾ ಕಳುಹಿಸುವ ಯಾರೋ ಮೇಲಿರಬೇಕು. ಅದನ್ನೇ ಅಂದು ಅವನು” ದೇವರು” ಎಂದ.  ಮುಂದೆ ತನಗೆ ಉಪಯೋಗಕ್ಕೆ ಬರುವ ಎಲ್ಲಕ್ಕೂ ಆ ದೈವತ್ವವನ್ನು ಆರೋಪಿಸುತ್ತಾ ಹೋದ. ವಿಡಂಬನೆಯೇನೆಂದರೆ ಇಂದಿಗೂ ಮಾನವನ ಸ್ತಿತಿ ಹಾಗೆ ಇದೆ. ತನಗೆ ಉಪಯೋಗಕ್ಕೆ ಬರುವುದೆಲ್ಲಾ, ಅಂದರೆ ಭೂಮಿ, ಮನುಷ್ಯ, ಪ್ರಾಣಿ ಪಕ್ಷಿ ಗಿಡ ಮರ,ನದಿ ಸಮುದ್ರ, ಮಳೆ ಬಿಸಿಲು ಬೆಳಕು ಹೂವು  ಹಣ್ಣು  ಹೀಗೆ ಎಲ್ಲವೂ ಅವನಿಗೆ ದೈವ ಸಮಾನ.   ಆದರೆ ಆ ದೇವರೇನು  ಅಷ್ಟೊಂದು ಗಹನನೆ? ಗುಹ್ಯನೆ? ಅರ್ಥವಾಗದವನೇ? ದೇವರು ಗಹನನನೋ ಅಲ್ಲವೋ ಗೊತ್ತಿಲ್ಲ. ಆದರೆ ಇಂದಿಗೂ ” ಅದು ” ಇದೇ” ಎಂದು ಹೇಳುವ ಒಂದು ಪ್ರಮಾಣ ಸಿಕ್ಕಿಲ್ಲ  ಅಲ್ಲವೆ?. ಸಿಕ್ಕಿದ್ದಿದ್ದರೆ ಆ ದೇವರ ರೂಪ ಮತ್ತು ಸ್ವರೂಪಗಳ ಬಗ್ಗೆ ಇಷ್ಟೊಂದು ಭಿನ್ನ ಭಿನ್ನ ಅಭಿಪ್ರಾಯಗಳು ಇರುತ್ತಿರಲಿಲ್ಲ ಅಲ್ಲವೆ? ದೇವರನ್ನು ಪರಿಭಾಷಿಸಿದವರೆಲ್ಲ( ಪರಿಭಾಷೆ = definition )ತಮ್ಮ ತಮ್ಮ ಅನುಭವದ ವೃತ್ತದಲ್ಲೇ ಆ ದೇವರನ್ನು ವಿವರಿಸಿದ್ದಾರೆ. ಅಂದರೆ ಆ ದೇವರು ಎನ್ನುವ ವಸ್ತು ಅನುಭವ ವೇದ್ಯ ಮಾತ್ರ. ವಾಚಕರೆ, ನೋಡಿ ಈ ಜಗತ್ತಿನ ಅಥವಾ ಸೃಷ್ಟಿಯಲ್ಲಿ ನಡೆಯುವ ವಿಧ್ಯಮಾನಗಳನ್ನೆಲ್ಲ, ಅದರ ನಿಜ ಸ್ವರೂಪ ಮತ್ತು ಕಾರ್ಯ ವೈಖರಿ ಮತ್ತು ಆ ವಿಧ್ಯಮಾನಗಳಿಗೆ ಕಾರಣ ಮತ್ತು ಕಾರಕ ಯಾರು ಏನು ಅಂದು ಇಂದಿಗೂ ಮಾನವನಿಗೆ ಅರ್ಥೈಸಲಾಗಿಲ್ಲ. ವಿಜ್ಞಾನದ ಮೂಲಕ ಅವನು ಕಂಡು ಹಿಡಿದುಕೊಂಡಿರುವುದು ಕೇವಲ ಸಾವಿರಕ್ಕೆ ಒಂದು ಪಾಲೂ ಇಲ್ಲ. ಅಷ್ಟೇ ಅಲ್ಲ ನಿರಂತರ ಬದಲಾಗುತ್ತ ಹೊಸ ಹೊಸ ಆಯಾಮವನ್ನು ತಳೆಯುವ ಈ ಸೃಷ್ಟಿಯನ್ನು ಅರಿಯಲು ವಿಜ್ಞಾನದ ಪ್ರಯೋಗಗಳಿಂದ ಸಾಧ್ಯವೇ?  ಹಾಗಾಗಿ ಅವನು ಗುಹ್ಯನು ಎನ್ನುವ ಅರ್ಥದಲ್ಲಿ ಮಾನ್ಯ ಗುಂಡಪ್ಪನವರು ಕೇಳುತ್ತಾರೆ. 
ಹಾಗೆ  ಆ ದೇವರು ಈ ಪ್ರಪಂಚವನ್ನು ಮತ್ತು ಇಲ್ಲಿರುವ ಎಲ್ಲವನ್ನೂ ಸೃಷ್ಟಿಸಿ ಎಲ್ಲರನ್ನೂ ಕಾಪಾಡುವವನಾಗಿದ್ದರೆ, ಎಲ್ಲರೂ ಸಮಾನವಾಗಿ ಸುಖವಾಗಿರಬೇಕಲ್ಲವೆ? ಈ ಹುಟ್ಟು ಸಾವುಗಳೇಕೆ? ನೋವು ದುಃಖಗಳೇಕೆ ? ಮನುಷ್ಯ ಮನುಷ್ಯರಲ್ಲಿ ಇಷ್ಟೊಂದು ಬೇಧವೇಕೆ? ಆ   ದೇವರು ಎಲ್ಲರನ್ನೂ ಕಾಯುವವನದರೆ ಎಲ್ಲರನ್ನು ಸಮಾನವಾಗಿ ಕಾಯಬೇಕಲ್ಲವೇ?  ಈ ಸಾವು ನೋವುಗಳಿಗೇನು ಅರ್ಥ? ಹೀಗೆ ಹತ್ತು ಹಲವಾರು ಪ್ರಶ್ನೆಗಳನ್ನು ಈ ಕಗ್ಗದ ಮೂಲಕ  ಮಾನನೀಯ ಗುಂಡಪ್ಪನವರು ಎತ್ತಿದ್ದಾರೆ. ಇಂತಹ ಪ್ರಶ್ನೆಗಳು ಸಾಮಾನ್ಯವಾಗಿ ಎಲ್ಲರಲ್ಲೂ ಅವರವರ ಜೀವನದ ಯಾವುದಾದರೂ ಘಳಿಗೆಯಲ್ಲಿ ಉದ್ಭವಿಸಿರಬಹುದು. 

Leave a Reply

Your email address will not be published. Required fields are marked *

Call Now Button